July 27, 2024

ಭೂ ಮಂಜೂರಾತಿ ಅಕ್ರಮ ಕಾನೂನು ಕ್ರಮ ಕೈಗೊಳ್ಳದಿದ್ದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ

0
ರೈತ ಸಂಘದ ಜಿಲ್ಲಾಧ್ಯಕ್ಷ ಗುರುಶಾಂತಪ್ಪ ಸುದ್ದಿಗೋಷ್ಠಿ

ರೈತ ಸಂಘದ ಜಿಲ್ಲಾಧ್ಯಕ್ಷ ಗುರುಶಾಂತಪ್ಪ ಸುದ್ದಿಗೋಷ್ಠಿ

ಚಿಕ್ಕಮಗಳೂರು: ಭೂ ಮಂಜೂರಾತಿ ಅಕ್ರಮದಲ್ಲಿ ಭಾಗಿಯಾಗಿರುವ ಕಂದಾಯ ಇಲಾಖೆ ಅಧಿಕಾರಿ ನೌಕರರ ಮೇಲೆ ತಕ್ಷಣ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳದಿದ್ದಲ್ಲಿ ಇನ್ನು ೧೫ ದಿನಗಳ ನಂತರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಲು ಕರ್ನಾಟಕ ರಾಜ್ಯ ರೈತ ಸಂಘ ನಿರ್ಧರಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ಇಂದು ಈ ವಿಷಯ ತಿಳಿಸಿದ ರೈತ ಸಂಘದ ಜಿಲ್ಲಾಧ್ಯಕ್ಷ ಗುರುಶಾಂತಪ್ಪ ಅವರು ಕಡೂರು ಮತ್ತು ಮೂಡಿಗೆರೆ ತಾಲೂಕಿನಲ್ಲಿ ನಡೆದಿದ್ದ ಅಕ್ರಮ ಭೂ ಮಂಜೂರಾತಿ ಪ್ರಕರಣದ ತನಿಖೆಗೆ ೧೬ ಜನ ತಹಶೀಲ್ದಾರ್‌ಗಳನ್ನು ಕಳುಹಿಸಿ, ತನಿಖೆ ನಡೆಸಿ ವರದಿಯನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿದ್ದು ೯೫ ಜನ ನೌಕರರ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರ ಜಿಲ್ಲಾಧಿಕಾರಿಗಳಿಗೆ ಸೂಚಸಲಾಗಿದೆ ಎಂದು ತಿಳಿಸಿದರು.

ಅಕ್ರಮದಲ್ಲಿ ಭಾಗಿಯಾಗಿರುವ ಗ್ರಾಮ ಲೆಕ್ಕಾಧಿಕಾರಿಗಳು, ರಾಜಸ್ವ ನಿರೀಕ್ಷಕರು, ತಹಶೀಲ್ದಾರ್ ಇವರುಗಳ ವಿರುದ್ಧ ತಕ್ಷಣ ಎಫ್‌ಐಆರ್ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಕಡೂರು ತಾಲೂಕು ತಹಸೀಲ್ದಾರ್ ಆಗಿದ್ದ ಜೆ.ಉಮೇಶ್ ವಿರುದ್ಧ ಉಳ್ಳಿ ನಾಗರು ಜಮೀನು ಅಕ್ರಮ ಖಾತೆ ಬದಲಾವಣೆ ಸಂಬಂಧ ತರೀಕೆರೆ ಉಪ ವಿಭಾಗಾಧಿಕಾರಿಗಳು ಸಮಗ್ರ ತನಿಖೆ ನಡೆಸಿ ೩೨೪ ಅಕ್ರಮ ಭೂ ಮಂಜೂರಾತಿ ಮಾಡಿರುವ ಹಗರಣವನ್ನು ಪತ್ತೆಹಚ್ಚಿ ಎಫ್‌ಐಆರ್ ದಾಖಲಿಸಲಾಗಿದೆ. ಈ ಆರೋಪಿ ಉಮೇಶ್ ಅವರಿಗೆ ಈಗ ಉಪ ವಿಭಾಗಾಧಿಕಾರಿಯಾಗಿ ಮುಂಬಡ್ತಿ ನೀಡಲಾಗಿದ್ದು, ಜೆ.ಉಮೇಶ್‌ಗೆ ಕೂಡಲೇ ಹಿಂಬಡ್ತಿ ನೀಡಬೇಕೆಂದು ಒತ್ತಾಯಿಸಿದರು.

ಕಡೂರು ಕಸಬಾ ಹೋಬಳಿ ಗ್ರಾಮ ಲೆಕ್ಕಾಧಿಕಾರಿಯಾಗಿದ್ದ ಮಂಜುನಾಥ ಅವರ ವಿರುದ್ಧ ಹಳ್ಳಿಕೆರೆ ಕಾವಲು ಭೂಮಿಯಲ್ಲಿ ೧೨೦೦ ಎಕರೆ ಜಮೀನನ್ನು ಅಕ್ರಮವಾಗಿ ಮಂಜೂರು ಮಾಡಿದ್ದು ಈ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗಿದೆ ಎಂದರು.

ಆದರೆ ಈ ವ್ಯಕ್ತಿಯನ್ನು ಕಡೂರು ಕ್ಷೇತ್ರದ ಶಾಸಕರು ಆಪ್ತ ಸಹಾಯಕರಾಗಿ ನೇಮಕ ಮಾಡಿಕೊಂಡಿರುವುದು ಸರಿಯಲ್ಲ. ಕೂಡಲೆ ಅವರನ್ನು ಆಪ್ತ ಸಹಾಯಕರ ಸ್ಥಾನದಿಂದ ತೆರವುಗೊಳಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ರೈತಸಂಘ ಒತ್ತಾಯಿಸುತ್ತದೆ ಎಂದರು.

ಈ ಅಕ್ರಮ ಭೂ ಹಗರಣದಲ್ಲಿ ಗುರುತಿಸಲಾಗಿರುವ ಅಧಿಕಾರಿಗಳ ವಿರುದ್ಧ ಇನ್ನು ೧೫ ದಿನಗಳಲ್ಲಿ ಕ್ರಮ ಕೈಗೊಳ್ಳದಿದ್ದರೆ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಧರಣಿ ನಡೆಸುವ ಮೂಲಕ ತೀವ್ರ ಸ್ವರೂಪದ ಹೋರಾಟ ಮಾಡುವುದಾಗಿ ಎಚ್ಚರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ರೈತ ಸಂಘದ ಕಡೂರು ತಾಲೂಕು ಅಧ್ಯಕ್ಷ ಕೆ.ಟಿ ಆನಂದ್, ತಾಲೂಕು ಗೌರವಾಧ್ಯಕ್ಷ ಮಲ್ಲುಂಡಪ್ಪ, ತಾಲೂಕು ಪ್ರಧಾನ ಕಾರ್ಯದರ್ಶಿ ಹೆಚ್.ಡಿ ಉಮೇಶ್, ಮುಖಂಡರಾದ ಬಸವರಾಜ್, ದರ್ಶನ್ ಇದ್ದರು.

Dharna in front of the District Collector’s office if legal action is not taken against illegal land allotment

About Author

Leave a Reply

Your email address will not be published. Required fields are marked *