ಚಿಕ್ಕಮಗಳೂರು: ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆ ವೇಳೆಯ ಪ್ರಚಾರ ಸಂದರ್ಭದಲ್ಲಿ ಬಿಜೆಪಿ-ಜೆಡಿಎಸ್ ಪಕ್ಷದ ಕಾರ್ಯಕರ್ತರ ಉತ್ಸಾಹ ನೋಡಿ ನನ್ನ ಗೆಲುವು ಖಚಿತ ಅನಿಸಿತು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ನೂತನ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ತಿಳಿಸಿದರು.
ಅವರು ಇಂದು ಜಿಲ್ಲಾ ಬಿಜೆಪಿ ಕಚೇರಿ ಪಾಂಚಜನ್ಯದಲ್ಲಿ ಏರ್ಪಡಿಸಲಾಗಿದ್ದ ನೂತನ ಲೋಕಸಭಾ ಹಾಗೂ ವಿಧಾನ ಪರಿಷತ್ಗೆ ಆಯ್ಕೆಯಾಗಿರುವ ಎನ್ಡಿಎ ಸದಸ್ಯರುಗಳಿಗೆ ಅಭಿನಂದನಾ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.
ಜನ ತಂತ್ರ ವ್ಯವಸ್ಥೆಯಲ್ಲಿ ಜನರೇ ಶ್ರೇಷ್ಠ, ಪ್ರಧಾನಿ ನರೇಂದ್ರ ಮೋದಿ ಅವರು ಈ ಬಾರಿ ಪ್ರಮಾಣ ವಚನಕ್ಕೂ ಮುನ್ನ ಸಂವಿಧಾನಕ್ಕೆ ಹಣೆ ಇಟ್ಟು ನಮಸ್ಕಾರ ಮಾಡಿದರು. ಡಾ. ಬಿ.ಆರ್.ಅಂಬೇಡ್ಕರ್ ಅವರ ಅಂತ್ಯಸಂಸ್ಕಾರಕ್ಕೆ ಜಾಗ ಕೊಡದ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕೋ ಎಂಬುದನ್ನು ತಳ ಸಮುದಾಯದವರು ಯೋಚಿಸಬೇಕಾಗಿದೆ ಎಂದು ಹೇಳಿದರು.
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ವಿಭಿನ್ನ ಕ್ಷೇತ್ರವಾಗಿದ್ದು, ಭೌಗೋಳಿಕವಾಗಿ ಸಮಸ್ಯೆಗಳು ಬೇರೆ ಬೇರೆ ಇವೆ. ಸಮಸ್ಯೆಗಳನ್ನು ಅಧ್ಯಯನ ಮಾಡಿ ಪರಿಹಾರವನ್ನು ಕಂಡುಕೊಳ್ಳಲಾಗುವುದರ ಜೊತೆಗೆ ಕೇಂದ್ರ ಸರ್ಕಾರದ ಯೋಜನೆಗಳಿಗೆ ಚಾಲನೆ ನೀಡಲಾಗುವುದು ಎಂದು ಭರವಸೆ ನೀಡಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಸನ್ಮಾನ ಸ್ವೀಕರಿಸಿ ಮಾತನಾಡಿ, ಆತ್ಮಹತ್ಯೆ ಮತ್ತು ಹತ್ಯೆಯಲ್ಲಿ ರಾಜ್ಯ ಸರ್ಕಾರ ದಾಖಲೆ ನಿರ್ಮಾಣ ಮಾಡಿದೆ ಎಂದು ಅವರು ಆರೋಪಿಸಿದರು.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಬಂಡವಾಳ ಹೂಡಿಕೆಯಲ್ಲಿ ದಾಖಲೆ ನಿರ್ಮಾಣವಾಗಿತ್ತು. ಆದರೆ, ಇದೀಗ ಆತ್ಮಹತ್ಯೆ ಮತ್ತು ಹತ್ಯೆಯಲ್ಲಿ ದಾಖಲೆ ನಿರ್ಮಾಣವಾಗುತ್ತಿದೆ ಎಂದು ಟೀಕಿಸಿದರು.
ರಾಜ್ಯ ಸರ್ಕಾರದ ನಿರಾಸಕ್ತಿಯ ಪರಿಣಾಮ ಗುತ್ತಿಗೆದಾರರಿಗೆ ಹಣ ಬಿಡುಗಡೆಯಾಗುತ್ತಿಲ್ಲ. ಹಾಗಾಗಿ ವೇಗ ಗತಿಯಲ್ಲಿ ನಡೆಯುತ್ತಿದ್ದ ಕಾಮಗಾರಿಗಳು ಆಮೆಗತಿಯಲ್ಲಿ ಸಾಗುತ್ತಿವೆ. ಆರ್ಥಿಕ ಸ್ಥಿತಿಗೆ ಸರ್ಕಾರ ಕನ್ನ ಹಾಕುತ್ತಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ೧೮೭ ಕೋಟಿ ರುಪಾಯಿ ನಕಲಿ ಖಾತೆಗೆ ವರ್ಗಾವಣೆ ಆಗಿದೆ ಎಂದು ದೂರಿದರು.
ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಭ್ರಷ್ಟಾಚಾರದ ಹಿಂದೆ ಕಾಣದ ಕೈಗಳು ಕೆಲಸ ಮಾಡಿವೆ. ಸಚಿವ ನಾಗೇಂದ್ರ ಮಾತ್ರವಲ್ಲ ಮುಖ್ಯಮಂತ್ರಿಯವರು ನೈತಿಕ ಹೊಣೆ ಹೊರಬೇಕು ಎಂದು ಆಗ್ರಹಿಸಿದರು.
ಚಿಕ್ಕಮಗಳೂರು ತಾಲೂಕಿನಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗಿವೆ. ಜ್ವರ ಪೀಡಿತ ರೋಗಿಗಳಿಂದ ಆಸ್ಪತ್ರೆ ಭರ್ತಿಯಾಗಿದೆ. ಜನಪ್ರತಿನಿಧಿಗಳು ಸ್ಪಂದಿಸುತ್ತಿಲ್ಲ, ಜಿಲ್ಲಾ ಉಸ್ತುವಾರಿ ಸಚಿವರು ರಾಷ್ಟ್ರೀಯ ಹಬ್ಬಗಳಿಗೆ ಬಂದು ಧ್ವಜಾರೋಹಣ ನೆರವೇರಿಸಿ ತೆರಳುತ್ತಿದ್ದಾರೆ. ಇಲ್ಲಿರುವ ಅವರ ತೋಟಕ್ಕೆ ಬಂದು ಹೋಗುತ್ತಿದ್ದಾರೆ ಎಂದು ಆರೋಪಿಸಿ ಇಲ್ಲಿಗೆ ಬರುವುದು ಪಿಕ್ನಿಕ್ಗೆ ಅಂದುಕೊಂಡಿದ್ದಾರೆ ಎಂದು ಲೇವಡಿಮಾಡಿದರು.
ಕೊಬ್ಬರಿ ಬೆಳೆಗಾರರ ಬಗ್ಗೆ ರಾಜ್ಯ ಸರ್ಕಾರ ಮಾತನಾಡುತ್ತಿಲ್ಲ, ಮಳೆ ಬಂದರೂ ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ತಲೆದೋರಿದೆ ಎಂದು ಟೀಕಿಸಿದರು.
ಕಾಲದ ಸಾಮರ್ಥ್ಯದ ಮುಂದೆ ನಿಲ್ಲಲು ಯಾರಿಂದಲೂ ಸಾಧ್ಯವಿಲ್ಲ. ಕಾರ್ಯಕರ್ತರಿಗೆ ವಿಶ್ವಾಸ ತುಂಬುವ ಕೆಲಸ ಆಗಬೇಕಾಗಿದೆ. ಅನ್ಯಾಯವಾಗಲು ಬಿಡುವುದಿಲ್ಲ ಎಂದು ಹೇಳಿದ ಅವರು ನಮ್ಮ ಮುಂದೆ ಬಹಳಷ್ಟು ಸವಾಲುಗಳಿವೆ ಎಂದು ತಿಳಿಸಿದರು.
ವಿಧಾನ ಪರಿಷತ್ ಉಪ ಸಭಾಪತಿ ಎಂ.ಕೆ ಪ್ರಾಣೇಶ್ ಮಾತನಾಡಿ, ಮಾತು ಸಾಧನೆ ಆಗಬಾರದು, ಸಾಧನೆ ಮಾತಾಗಬೇಕು, ಈ ನಿಟ್ಟಿನಲ್ಲಿ ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರನ್ನು ನಾವು ಅನುಸರಿಸಬೇಕು ಎಂದು ಹೇಳಿದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಪಕ್ಷಕ್ಕೆ ಸೋಲಾಯಿತು, ಇದಕ್ಕೆ ನಾವು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ, ಆದರೆ ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಹಾಗೂ ವಿಧಾನ ಪರಿ?ತ್ ನಲ್ಲಿ ಭಾರೀ ಅಂತರದಲ್ಲಿ ಗೆಲ್ಲಿಸುವ ಮೂಲಕ ಕಾರ್ಯಕರ್ತರು ಹಾಗೂ ಮತದಾರರು ಮನ್ನಣೆ ನೀಡಿದ್ದಾರೆ, ವಿದ್ಯಾವಂತರು, ಪ್ರಜ್ಞಾವಂತರು ಹಾಗೂ ಜನ ಸಾಮಾನ್ಯರ ನಿರೀಕ್ಷೆಗಳನ್ನು ಚುನಾಯಿತರು ಈಡೇರಿಸಬಲ್ಲರು ಎಂಬ ವಿಶ್ವಾಸವಿದೆ ಎಂದರು.
ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಆಯ್ಕೆಯಾದ ವಿಧಾನ ಪರಿ?ತ್ ಸದಸ್ಯ ಎಸ್.ಎಲ್.ಭೋಜೇಗೌಡ ಅವರು ಮಾತನಾಡಿ, ಕಾಂಗ್ರೆಸ್ ಗೆ ಈ ಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲಿಸಿದ್ದಾರೆ, ಜನರು ಹಾಗೂ ಶಿಕ್ಷಕರಿಗೆ ಸಂಬಂಧಿಸಿದಂತೆ ಸಮಸ್ಯೆಗಳನ್ನು ಸದನದಲ್ಲಿ ಚರ್ಚಿಸಿ, ಪರಿಹಾರ ನೀಡಲು ಬದ್ಧನಿರುವೆ, ಹಾಗೆಯೇ ನಿಮ್ಮೆಲ್ಲರ ಧ್ವನಿಯಾಗಿ ಸಧನದ ಒಳಗೆ ಮತ್ತು ಹೊರಗೆ ಪಾವಿತ್ರ್ಯತೆಯನ್ನು ಕಾಪಾಡುವೆ ಎಂದರು.
ನೈರುತ್ಯ ಪದವೀಧರ ಕ್ಷೇತ್ರಕ್ಕೆ ಆಯ್ಕೆಯಾದ ವಿಧಾನ ಪರಿ?ತ್ ಸದಸ್ಯ ಡಾ.ಧನಂಜಯ ಸರ್ಜಿ ಅವರು ಮಾತನಾಡಿ, ಇದು ಎಲ್ಲರ ಪ್ರಯತ್ನದ ಗೆಲುವು, ಕಾರ್ಯಕರ್ತರ ಶಕ್ತಿಯ ಗೆಲುವು, ಇದು ಪದವೀಧರರ ಗೆಲುವು. ನಮ್ಮ ಪಕ್ಷದ ಸಂಘಟನೆ ಕೇಂಧ್ರ ಬಿಂದುವೇ ಕಾರ್ಯಕರ್ತರು, ಅವರ ಹುಮ್ಮಸ್ಸು, ಹುರುಪು, ಯಾವ ಪಕ್ಷದಲ್ಲೂ ಕಾಣಲು ಸಾಧ್ಯವಿಲ್ಲ ಎಂದ ಅವರು, ನಿ?ವಂತ ಕಾರ್ಯಕರ್ತರೂ ಬೆಳೆಯಬೇಕು, ಅವರನ್ನು ಬೆಳೆಸಬೇಕು, ಹಾಗೆಯೇ ಜನರು ಹಾಗೂ ಪದವೀಧರ ಮತದಾರರು ಪ್ರೀತಿ, ವಿಶ್ವಾಸದಿಂದ ಹರಸಿದ್ದಾರೆ, ಅವರ ನಿರೀಕ್ಷೆಗಳಿಗೆ ತಕ್ಕಂತೆ ಪ್ರಾಮಾಣಿಕ ಸೇವೆ ಸಲ್ಲಿಸುವುದಾಗಿ ಹೇಳಿದರು.
ಪ್ರಾಸ್ತಾವಿಕವಾಗಿ ಜಿಲ್ಲಾ ಬಿಜೆಪಿ ಅಧ್ಯಕ್ಷ ದೇವರಾಜಶೆಟ್ಟಿ ಮಾತನಾಡಿದರು. ವೇದಿಕೆಯಲ್ಲಿ ಬಿಜೆಪಿ ಮುಖಂಡರಾದ ರಂಗನಾಥ್, ನಗರ ಅಧ್ಯಕ್ಷ ಪುಷ್ಪರಾಜ್, ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕಲ್ಮುರುಡಪ್ಪ, ಬಿಜೆಪಿ ಮುಖಂಡರಾದ ಪ್ರೇಮ್ಕುಮಾರ್, ಬಿ.ರಾಜಪ್ಪ, ಸೋಮಶೇಖರ್, ಎಂ.ಎಸ್ ನಿರಂಜನ್, ಜೆಸೆಂತ ಅನಿಲ್ಕುಮಾರ್, ಮಧುಕುಮಾರ್ ರಾಜ್ ಅರಸ್ ಸೇರಿದಂತೆ ಪದಾಧಿಕಾರಿಗಳು, ನಗರ ಮತ್ತು ಮಂಡಲ ಅಧ್ಯಕ್ಷರು ಹಾಗೂ ನೂರಾರು ಕಾರ್ಯಕರ್ತರು ಹಾಜರಿದ್ದರು. ಇದಕ್ಕೂ ಮೊದಲು ಭಾರತಾಂಬೆಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.
Congratulations to the new Lok Sabha members – Legislative Council members