ಚಿಕ್ಕಮಗಳೂರು: ತನ್ನಂತೆ ಇತರರನ್ನು ಭಾವಿಸಿ ಸಮಾಜದಲ್ಲಿ ಶಾಂತಿಯುತ ಸಹಬಾಳ್ವೆಯ ಜೀವನ ನಡೆಸುವುದು ನಮ್ಮೆಲ್ಲರ ಕರ್ತವ್ಯ. ಪ್ರತಿಯೊಬ್ಬರು ಕಾನೂನು ತಿಳಿದು ಪಾಲಿಸಿದಲ್ಲಿ ಮಾನವ ಹಕ್ಕುಗಳ ರಕ್ಷಣೆ ಸಾಧ್ಯ ಎಂದು ಪ್ರಧಾನ ಕೌಟುಂಬಿಕ ನ್ಯಾಯಾಧೀಶರು ಮತ್ತು ಪ್ರಭಾರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಪ್ರಕಾಶ್ ವಿ. ಹೇಳಿದರು.
ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪೊಲೀಸ್ ಇಲಾಖೆ, ಜಿಲ್ಲಾ ವಕೀಲರ ಸಂಘ(ರಿ), ಜಿಲ್ಲಾ ಮಾನವ ಹಕ್ಕುಗಳ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚಿಕ್ಕಮಗಳೂರು ಇವರ ವತಿಯಿಂದ ಇಂದು ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಾನವ ಹಕ್ಕುಗಳ ಪರಿಧಿ ವ್ಯಾಪಕ ಸ್ವರೂಪದ್ದು ಅದು ನಾಗರಿಕ, ರಾಜಕೀಯ, ಸಾಂಸ್ಕೃತಿಕ ಮತ್ತು ಆರ್ಥಿಕ ಹಕ್ಕುಗಳನ್ನು ಒಳಗೊಂಡಿದೆ. ಭಾರತದ ಸಂವಿಧಾನವು ಪ್ರತಿ ಪ್ರಜೆಗೂ ಸಮಾನತೆಯ ಹಕ್ಕು, ಸಮಾನ ಕಾನೂನು ರಕ್ಷಣೆ, ಶೋಷಣೆ ರಹಿತ ಆರೋಗ್ಯಪೂರ್ಣ ಪರಿಸರದಲ್ಲಿ ಗೌರವಯುತ ಜೀವನ ನಡೆಸುವ ಹಕ್ಕು, ತಮ್ಮ ಆಯ್ಕೆಯ ವೃತ್ತಿ, ಕಲಿಕೆಯ ಹಕ್ಕು, ಭಾರತದ ಯಾವುದೇ ಸ್ಥಳಕ್ಕೆ ಹೋಗಲು ಮತ್ತು ಅಲ್ಲಿ ವಾಸಿಸಲು, ಆತ್ಮಸಾಕ್ಷಿ ಸ್ವಾತಂತ್ರ್ಯ, ನಂಬಿಕೆ ಮತ್ತು ಧಾರ್ಮಿಕ ಸ್ವಾತಂತ್ರ್ಯ, ಅಸ್ಪೃಶ್ಯತೆ, ಜಾತಿ ಮತ ಅಥವಾ ಲಿಂಗ ಆಧಾರಿತ ತಾರತಮ್ಯದಿಂದ ಮುಕ್ತವಾಗಿ ಜೀವಿಸುವ ಹಕ್ಕನ್ನು ನೀಡಿದೆ. ಇವುಗಳನ್ನು ತಿಳಿದು ಅನುಸರಿಸುವುದು ನಮ್ಮೆಲ್ಲರ ಜವಬ್ದಾರಿಯಗಿದೆ ಎಂದರು.
ನಮ್ಮ ಹಕ್ಕುಗಳು ನಮ್ಮ ಭವಿಷ್ಯವಾಗಿದೆ. ಮಾನವರಿಂದಲೇ ಮಾನವನ ಹಕ್ಕುಗಳಿಗೆ ಚ್ಯುತಿ ಉಂಟಾಗುವುದನ್ನು ತಡೆಗಟ್ಟಲು ಮಾನವ ಹಕ್ಕುಗಳ ರಕ್ಷಣೆಗೆ ಮತ್ತು ಅವುಗಳ ಪರಿಣಾಮಕಾರಿ ಜಾರಿಗಾಗಿ ಮಾನವ ಹಕ್ಕುಗಳ ರಕ್ಷಣೆ ಕಾಯ್ದೆ, ೧೯೯೩ರ ಅನ್ವಯ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮತ್ತು ರಾಜ್ಯ ಮಾನವ ಹಕ್ಕುಗಳ ಆಯೋಗಗಳನ್ನು ರಚನೆ ಮಾಡಲಾಗಿದೆ ಎಂದ ಅವರು ಪ್ರತಿಯೊಬ್ಬರು ಕಾನೂನು ತಿಳಿದು ಅವುಗಳನ್ನು ವ್ಯವಸ್ಥಿತ ರೂಪದಲ್ಲಿ ಪಾಲಿಸಬೇಕು ಎಂದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಸದಸ್ಯ ಕಾರ್ಯದರ್ಶಿ ವಿ. ಹನುಮಂತಪ್ಪ ಮಾತನಾಡಿ ತನ್ನಂತೆ ಪರರನ್ನು ಬಗೆಯದಿದ್ದರೆ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತದೆ. ಸಮಾಜದಲ್ಲಿ ಪ್ರತಿಯೊಬ್ಬರಿಗೂ ಸಮಾನತೆ, ಸ್ವಾತಂತ್ರ್ಯದಿಂದ ಬದುಕುವ ಹಕ್ಕಿದೆ. ಪ್ರಜೆಯ ಮಾನವ ಹಕ್ಕುಗಳನ್ನು ರಕ್ಷಿಸುವುದು ರಾಜ್ಯದ ಮತ್ತು ಇದರ ಎಲ್ಲಾ ಸಂಸ್ಥೆಗಳ ಆದ್ಯ ಕರ್ತವ್ಯ. ರಾಜ್ಯದ ಯಾವುದೇ ಕಛೇರಿಯಿಂದಾಗಲೀ ಅಥವಾ ಸಂಸ್ಥೆಯಿಂದಾಗಲೀ ವಿವಿಧ ರೀತಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾದ ಪಕ್ಷದಲ್ಲಿ ಅಥವಾ ಮಾನವ ಹಕ್ಕುಗಳ ರಕ್ಷಣೆ ಮಾಡಲು ವಿಫಲವಾಗಿರುವ ಸಂದರ್ಭಗಳಲ್ಲಿ, ತೊಂದರೆಗೆ ಒಳಗಾದವರ ಪರವಾಗಿ ಅವರ ಕುಂದು ಕೊರತೆಗಳನ್ನು ಆಲಿಸಿ ನ್ಯಾಯ ದೊರಕಿಸಿಕೊಡುವುದೇ ಮಾನವ ಹಕ್ಕುಗಳ ಆಯೋಗದ ಉದ್ದೇಶ ಎಂದ ಅವರು ಪ್ರತಿಯೊಬ್ಬರು ಮಾನವ ಹಕ್ಕುಗಳ ಹರಣ ಮಾಡದೇ ಸಹಭಾಳ್ವೆಯ ಜೀವನ ನಿರ್ವಹಿಸಿ ಎಂದರು.
ಜಿಲ್ಲಾ ಮಾನವ ಹಕ್ಕುಗಳ ಸಮಿತಿ ಅಧ್ಯಕ್ಷ ಹೆಚ್.ಸಿ ನಟರಾಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಸಾರ್ವಜನಿಕ ಬದುಕನ್ನು ನಿರ್ವಹಿಸುವ ಪ್ರತಿಯೊಬ್ಬ ನಾಗರೀಕನಿಗೂ ಕಾನೂನಿನ ಅವಶ್ಯಕತೆ ಬಹಳಷ್ಟಿದೆ. ತಾಯಿಯ ಭ್ರೂಣದಿಂದಲೇ ಮಾನವ ಹಕ್ಕುಗಳು ಪ್ರಾರಂಭವಾಗುತ್ತವೆ. ತಾನು ಬದುಕಬೇಕು ಇತರರನ್ನು ಬದುಕಲು ಬಿಡಬೇಕು ಎಂಬ ಮನೋಭಾವದಿಂದ ನಮ್ಮ ಹಕ್ಕುಗಳನ್ನು ನಾವೇ ರಕ್ಷಿಸಬೇಕು. ಲಿಂಗ ತಾರತಮ್ಯ, ವರ್ಣಬೇದ ಹಾಗೂ ಅಸಮಾನತೆಯಂತಹ ಸಾಮಾಜಿಕ ಪಿಡುಗುಗಳನ್ನು ಹೋಗಲಾಡಿಸಬೇಕು ಎಂದು ತಿಳಿಸಿದ ಅವರು ಸಂವಿಧಾನವನ್ನು ಓದಿ ತಿಳಿದು ಅವಕಾಶ ವಂಚಿತರು ತಮಗೆ ದೊರಕಬೇಕಾದ ಹಕ್ಕುಗಳನ್ನು ಧೈರ್ಯದಿಂದ ಪಡೆದುಕೊಳ್ಳಿ ಎಂದರು.
ಜಿಲ್ಲಾ ಕಾನೂನು ಪ್ರಾಧಿಕಾರದ ಸಹಾಯಕ ಮುಖ್ಯ ಅಭಿರಕ್ಷಕರಾದ ಡಿ. ನಟರಾಜ್ ಕಾರ್ಯಕ್ರಮದಲ್ಲಿ ಮಾನವ ಹಕ್ಕುಗಳ ರಕ್ಷಣ ಕಾಯ್ದೆ-೧೯೯೩ ರ ಕುರಿತು ಉಪನ್ಯಾಸ ನೀಡಿ ಕಾರ್ಯಕ್ರಮದಲ್ಲಿ ಚಿಕ್ಕಮಗಳೂರು ಉಪ ವಿಭಾಗಾಧಿಕಾರಿ ದಲ್ಜಿತ್ ಕುಮಾರ್, ತಹಶೀಲ್ದಾರ್ ಡಾ. ಸುಮಂತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಮಹಂತೇಶ್ ಭಜಂತ್ರಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಡಿ.ಬಿ ಸುಜೇಂದ್ರ, ಜಿಲ್ಲಾ ಮಾನವ ಹಕ್ಕುಗಳ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ.ಸಿ ಕೃಷ್ಣಯ್ಯಗೌಡ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿ ಸಿಬ್ಬಂಧಿಗಳು ಹಾಗೂ ಅಂಗನವಾಡಿ ಕಾರ್ಯರ್ತೆಯರು ಉಪಸ್ಥಿತರಿದ್ದರು
Human rights can be protected if everyone knows and obeys the law.