ಚಿಕ್ಕಮಗಳೂರು: ಕಾಂಗ್ರೆಸ್ ಅಮಿತ್ ಷಾ ಅವರ ಹೇಳಿಕೆಯನ್ನು ತಿರುಚಿ ಸುಳ್ಳು ಆರೋಪ ಮಾಡುತ್ತಿದೆ. ರಾಹುಲ್ ಗಾಂಧಿ ಅವರು ಈ ಕುತಂತ್ರದ ರೂವಾರಿಯಾಗಿದ್ದಾರೆ. ಉz್ದೆÃಶಪೂರ್ವಕವಾಗಿ ಅಮಿತ್ ಷಾ ವಿರುದ್ಧ ಸುಳ್ಳು ಆರೋಪ ಮಾಡಲಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ನಾಲ್ಕು ತಂಡಗಳಾಗಿ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.
ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಕಾಂಗ್ರೆಸ್ ಕಚೇರಿಗೆ ಪೊಲೀಸ್ ಬಿಗಿ ಬಂದೋಬಸ್ತ್ ಒದಗಿಸಿದ್ದರು. ಅಲ್ಲದೆ ಒಂದು ತಂಡವನ್ನು ಕಾಂಗ್ರೆಸ್ ಕಚೇರಿ ಎದುರು ಪೊಲೀಸರು ವಶಕ್ಕೆ ಪಡೆದರೆ, ಕೆಲವರನ್ನು ಕಾಂಗ್ರೆಸ್ ಕಚೇರಿಯಿಂದ ನೂರು ಮೀಟರ್ ದೂರದಲ್ಲೇ ಹಾಗೂ ಇನ್ನುಳಿದವರನ್ನು ಬಿಜೆಪಿ ಕಚೇರಿ ಸಮೀಪವೇ ವಶಕ್ಕೆ ಪಡೆದರು.
ಭಾರತದ ಗೃಹಮಂತ್ರಿ ಅಮಿತ್ ಷಾ ಅವರ ಹೇಳಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ತುಂಡರಿಸಿ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಆರೋಪಿಸಿದ ಬಿಜೆಪಿ ಕಾರ್ಯಕರ್ತರು ದಾರಿಯುದ್ದಕ್ಕೂ ಗೃಹ ಮಂತ್ರಿಗಳ ವಿರುದ್ಧ ಕಾಂಗ್ರೆಸ್ ಷಡ್ಯಂತ್ರ ರೂಪಿಸಿದೆ ಎಂದು ಘೋಷಣೆ ಕೂಗಿದರು.
ಈ ವೇಳೆ ಬಿಜೆಪಿ ಕಾರ್ಯಕರ್ತರು ರಾಹುಲ್ ಗಾಂಧಿ ಭಾವಚಿತ್ರವನ್ನು ಹಿಡಿದು ರಾಹುಲ್ ಕಳ್ಳ ಎಂದು ಘೋಷಣೆ ಕೂಗಿದರು. ಈ ನಡುವೆ ಮಹಿಳಾ ಬಿಜೆಪಿ ಕಾರ್ಯಕರ್ತರು ದಿಢೀರನೆ ಕಾಂಗ್ರೆಸ್ ಕಚೇರಿಯತ್ತ ಧಾವಿಸಿದ ಕೂಡಲೇ ಪೊಲೀಸರು ಮಹಿಳಾ ಕಾರ್ಯಕರ್ತರನ್ನು ರಸ್ತೆ ಮಧ್ಯೆಯೇ ತಡೆದು ವಶಕ್ಕೆ ಪಡೆದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಹಿರೇಮಗಳೂರು ಪುಟ್ಟಸ್ವಾಮಿ, ಕುರುವಂಗಿ ವೆಂಕಟೇಶ್, ಪುಷ್ಪರಾಜ್, ಮಧುಕುಮಾರ್ ರಾಜ್ ಅರಸ್, ಸಂತೋಷ್ ಕೋಟ್ಯಾನ್, ಅಂಕಿತಾ, ಚೈತ್ರಾ ಗೌಡ ಮತ್ತಿತರರಿದ್ದರು.
Attempt to storm Congress office – BJP workers arrested