ಚಿಕ್ಕಮಗಳೂರು: ಗ್ರಾಹಕರ ಹಕ್ಕುಗಳ ರಕ್ಷಣೆ ಎಲ್ಲರ ಹೊಣೆಯಾಗಿದೆ. ಗ್ರಾಹಕರು ತಮ್ಮ ಹಕ್ಕುಗಳು ಹಾಗೂ ಜವಾಬ್ದಾರಿಗಳ ಬಗ್ಗೆ ಹೆಚ್ಚಿನ ಜ್ಞಾನ ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಎನ್.ಆರ್. ಚನ್ನಕೇಶವ ಹೇಳಿದರು.
ಜಿಲ್ಲಾಡಳಿತ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾನೂನು ಮಾಪನಶಾಸ್ತ್ರ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ವತಿಯಿಂದ ಇಂದು ನಗರದ ಬಸವನಹಳ್ಳಿಯ ಬಾಲಿಕಾ ಸರ್ಕಾರಿ ಪದವಿ ಪೂರ್ವ ಕಾಲೇಜಿ(ಪ್ರೌಢಶಾಲಾ ವಿಭಾಗ) ನಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾಹಕರು ಅಂದರೆ ನಾವೆಲ್ಲರು, ನಾವು ಇಂದು ನಮ್ಮ ಗ್ರಾಹಕ ಹಕ್ಕುಗಳ ಬಗ್ಗೆ ತಿಳಿಯುವುದು ಬಹಳ ಮುಖ್ಯವಾಗುತ್ತದೆ. ಖರೀದಿದಾರನ ಯೋಗ ಕ್ಷೇಮದ ದೃಷ್ಟಿಯಲ್ಲಿ ಗ್ರಾಹಕ ಹಕ್ಕುಗಳ ಅವಶ್ಯಕತೆ ಇದೆ. ಗ್ರಾಹಕ ಹಕ್ಕುಗಳ ಬಗ್ಗೆ ತಿಳಿಯದೇ ಹೋದರೆ ನಮಗೆ ಒಳಿತಿಲ್ಲ, ಗ್ರಾಹಕರ ರಕ್ಷಣೆ ಸಮಾಜದ ಧ್ವನಿಯಾದಾಗ ಮಾತ್ರ ಗ್ರಾಹಕರ ರಕ್ಷಣೆ ಸಾಧ್ಯ. ತಾವು ಖರೀದಿಸಲಾದ ವಸ್ತು ಹಾಗೂ ಅದರ ಸೇವೆ ಗುಣಮಟ್ಟದ್ದಾಗಿದೆಯೋ, ಇಲ್ಲವೋ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು.
ಖರೀದಿಸಲಾದ ವಸ್ತುವಿನ ಬಿಲ್ನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು. ಮೋಸ ಮಾಡುವವರು ತುಂಬಾ ಚಾಣಾಕ್ಷ ನಡೆ ಅನುಸರಿಸುತ್ತಾರೆ. ಇಂಥ ಕೃತ್ಯಗಳಿಗೆ ಕಡಿವಾಣ ಹಾಕಲು ಪ್ರತಿಯೊಬ್ಬರು ಸುಶಿಕ್ಷಿತರಾಗಿರಬೇಕು ಅದರಲ್ಲೂ ತಂತ್ರಜ್ಞಾನ ತಿಳಿದುಕೊಳ್ಳಬೇಕು. ಸಾರ್ವಜನಿಕರು ಮಾರುಕಟ್ಟೆಯಲ್ಲಿ ಯಾವುದೇ ವಸ್ತುಗಳನ್ನು ಖರೀದಿಸುವಾಗ ಎಚ್ಚರವಹಿಸುವುದು ಅತ್ಯವಶ್ಯಕವಾಗಿದೆ. ಗ್ರಾಹಕರ ಹಕ್ಕುಗಳ ಬಗ್ಗೆ ಅರಿವು ಹೊಂದಿದ್ದರೆ ಮಾರುಕಟ್ಟೆಯಲ್ಲಿ ವಸ್ತುಗಳ ಖರೀದಿ ಕಲಬೆರಕೆ ಬಗ್ಗೆ ಎಚ್ಚರ ವಹಿಸಲು ಸಾಧ್ಯ ಎಂದು ಹೇಳಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ವಿ. ಹನುಮಂತಪ್ಪ ಮಾತನಾಡಿ ಸಮಾಜದಲ್ಲಿ ಒಬ್ಬರನ್ನೊಬ್ಬರು ಅವಲಂಬಿಸಿರುವುದರಿಂದ ದಿನನಿತ್ಯ ಜೀವನಕ್ಕೆ ಅಗತ್ಯವಾದ ವಸ್ತುಗಳನ್ನು ಖರೀದಿಸುವಾಗ ನಡೆಯುವ ಮೋಸ, ವಂಚನೆಗೆ ಒಳಗಾಗುವುದನ್ನು ತಡೆಯಲು ಜಾಗೃತವಾಗಿರಬೇಕು ಎಂದ ಅವರು ಗ್ರಾಹಕರ ಹಕ್ಕುಗಳ ಬಗ್ಗೆ ತಿಳಿದುಕೊಳ್ಳಬೇಕು.
ಗ್ರಾಹಕರು ಎಷ್ಟೇ ಜಾಗೃತರಾಗಿದ್ದರೂ ಒಂದೊಮ್ಮೆ ಮೋಸ ಹೋಗುವುದು ಸಹಜ, ಇಂತಹ ಸಂದರ್ಭದಲ್ಲಿ ಮೋಸ ಹೋದ ಯಾವುದೇ ಗ್ರಾಹಕನು ತನಗಾದ ನಷ್ಟವನ್ನು ಹಿಂಪಡೆಯಲು ಗ್ರಾಹಕ ವೇದಿಕೆಗೆ ಲಿಖಿತ ರೂಪದಲ್ಲಿ ದೂರನ್ನು ಸಲ್ಲಿಸಬಹುದು.
ಗ್ರಾಹಕರಿಗೆ ಸುರಕ್ಷತೆಯ ಹಕ್ಕನ್ನು ನೀಡಲಾಗಿದೆ. ಅವರು ಖರೀದಿಸುವ ಯಾವುದೇ ವಸ್ತು, ಸರಕು, ಅಥವಾ ಪಡೆಯುವ ಸೇವೆಯು ಸುರಕ್ಷಿತವಾಗಿರಬೇಕೆಂದು ಈ ಹಕ್ಕು ಹೇಳುತ್ತದೆ. ಸುರಕ್ಷತೆಯ ಹಕ್ಕನ್ನು ಕೇವಲ ಗ್ರಾಹಕ ಸಂರಕ್ಷಣಾ ಕಾಯ್ದೆ ಮಾತ್ರವಲ್ಲ ಇನ್ನೂ ಅನೇಕ ಕಾನೂನುಗಳಲ್ಲಿ ಅವಕಾಶ ನೀಡಲಾಗಿದ್ದು, ದೀರ್ಘ ಬಾಳಿಕೆಯ ವಸ್ತುಗಳು, ಔಷಧ, ಸೌಂದರ್ಯವರ್ಧಕ, ಆಹಾರ, ಪಾನೀಯ ಎಲ್ಲವು ಗ್ರಾಹಕರಿಗೆ ಸುರಕ್ಷಿತವಾಗಿರಬೇಕು ಎಂದು ಹೇಳಿದರು.
ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಮಹಿಳಾ ಸದಸ್ಯರಾದ ಪ್ರೇಮ .ಇ ಮಾತನಾಡಿ ಗ್ರಾಹಕರಿಗೆ ಅನಗತ್ಯವಾಗಿ ವಂಚಿಸುವ ಇ-ಕಾಮರ್ಸ್ ಮತ್ತು ಡಿಜಿಟಲ್ ವ್ಯವಹಾರ ಹಾಗೂ ಆನ್ ಲೈನ್ನಲ್ಲಿ ಖರೀದಿಸುವ ಗ್ರಾಹಕರಿಗೆ ಎಷ್ಟು ಅನುಕೂಲವೋ ಅಷ್ಟೇ ವಂಚನೆ ಪ್ರಕರಣಗಳು ಕೂಡ ಹೆಚ್ಚು. ಈ ಬಗ್ಗೆ ಗ್ರಾಹಕರು ಎಚ್ಚರಿಕೆಯಿಂದ ವ್ಯವಹಾರ ಮಾಡುವುದರ ಜೊತೆಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವುದು ಬಹಳ ಮುಖ್ಯ ಎಂದು ಹೇಳಿದರು.
ಚಿಕ್ಕಮಗಳೂರು ಉಪವಿಭಾಗದ ಉಪವಿಭಾಗಾಧಿಕಾರಿಗಳು ಹಾಗೂ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕಿ ರಶ್ಮಿ ಎಸ್.ಆರ್. ಸ್ವಾಗತಿಸಿದರು. ಬಸವನಹಳ್ಳಿ ಬಾಲಿಕ ಸ.ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ) ಉಪ ಪ್ರಾಚಾರ್ಯರಾದ ಚಂದ್ರಮ್ಮ ಎಸ್. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸಹಾಯಕ ರಿಜಿಸ್ಟರ್ ಇಂದುಮತಿ ಬಾಯಿ, ಕಾನೂನು ಮಾಪನಶಾಸ್ತ್ರ ಇಲಾಖೆ ಸಹಾಯಕ ನಿಯಂತ್ರಕ ರಾಜೀವ್ ಬಿ.ಎನ್., ಆಹಾರ ನಾಗರೀಕ ಸರಬಾರಜು ಮತ್ತು ಗ್ರಾಹಕರ ವ್ಯವಹಾರ ಇಲಾಖೆಯ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
National Consumer Day program