ಚಿಕ್ಕಮಗಳೂರು: ದೇಶದ ಬೆನ್ನೆಲುಬಾಗಿರುವ ರೈತರ ಉತ್ಪನ್ನಗಳಿಗೆ ಸರ್ಕಾರ ಬೆಂಬಲ ಬೆಲೆ ನೀಡಿ ಖರೀದಿಸುವ ಮೂಲಕ ರೈತರ ಜೀವನ ಆರ್ಥಿಕವಾಗಿ, ಸಮರ್ಪಕವಾಗಿ, ಸದೃಢವಾಗಿರಲು ನೆರವಾಗಿದೆ ಎಂದು ಶಾಸಕ ಹೆಚ್.ಡಿ ತಮ್ಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
ಅವರು ಇಂದು ಇಲ್ಲಿನ ಎಪಿಎಂಸಿ ಆವರಣದಲ್ಲಿ ಜಿಲ್ಲಾಡಳಿತ, ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ರಾಜ್ಯ ಸಹಕಾರ ಮಹಾ ಮಂಡಲ ಜಿಲ್ಲಾ ಶಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ೨೦೨೪-೨೫ ನೇ ಸಾಲಿನ ಸರ್ಕಾರದ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ರಾಗಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು.
ಹಣವಿಲ್ಲದೆ ಬದುಕಬಹುದು, ಆಹಾರವಿಲ್ಲದೆ ಬದುಕಲು ಸಾಧ್ಯವಿಲ್ಲ. ದೇಶದ ಜೀವಾಳವಾಗಿರುವ ರೈತರ ಬುದಕನ್ನು ಗಟ್ಟಿಗೊಳಿಸುವ ಉದ್ದೇಶದಿಂದ ಸರ್ಕಾರ ಬೆಂಬಲ ಬೆಲೆ ಮೂಲಕ ಆಹಾರ ಪದಾರ್ಥಗಳನ್ನು ಖರೀದಿಸುತ್ತಿದ್ದು, ಮುಂದಿನ ದಿನಗಳಲ್ಲಿ ತರಕಾರಿ ಸೇರಿದಂತೆ ರೈತರ ಎಲ್ಲಾ ಉತ್ಪನ್ನಗಳನ್ನು ಬೆಂಬಲ ಬೆಲೆ ಯೋಜನೆಯಡಿ ಖರೀದಿಸಬೇಕೆಂದು ಒತ್ತಾಯಿಸಿದರು.
ಕೃಷಿ ಅವಲಂಬಿತ ಕೃಷಿ ಪ್ರಧಾನ ದೇಶ ಭಾರತದಲ್ಲಿ ಜನಸಂಖ್ಯೆಯ ಶೇ.೭೦ ರಷ್ಟು ರೈತ ಸಮುದಾಯ ಮತ್ತು ರೈತ ಕೃಷಿ ಕಾರ್ಮಿಕರನ್ನು ಹೊಂದಿದೆ ಎಂದು ಹೇಳಿದ ಅವರು, ಈ ಸಾಲಿನ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಸರ್ಕಾರ ರಾಜ್ಯಾದ್ಯಂತ ೮ ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿಗೆ ಅನುಮತಿ ನೀಡಿದೆ ಎಂದು ಹೇಳಿದರು.
ಪ್ರತೀ ಕ್ವಿಂಟಾಲ್ ರಾಗಿಗೆ ೪೨೯೦ ರೂಗಳನ್ನು ನಿಗಧಿಮಾಡಲಾಗಿದ್ದು, ಎಲ್ಲಾ ರೈತರಿಂದ ಪ್ರತಿ ಎಕರೆಗೆ ೧೦ ಕ್ವಿಂಟಾಲ್ನಂತೆ ಗರಿಷ್ಟ ೨೦ ಕ್ವಿಂಟಾಲ್ ರಾಗಿ ಖರೀದಿಸಲು ಅವಕಾಶವಿದ್ದು, ಈ ಸಂಬಂಧ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಟಾಸ್ಕ್ಪೋರ್ಸ್ ಸಮಿತಿ ಸಭೆಯಲ್ಲಿ ತೀರ್ಮಾನಿಸಿದಂತೆ ಇಂದು ಇಲ್ಲಿ ರಾಗಿ ಖರೀದಿ ಕೇಂದ್ರವನ್ನು ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯಾದ್ಯಂತ ೧೮,೦೭೧ ರೈತರಿಂದ ೨,೦೮,೫೦೦ ಕ್ವಿಂಟಾಲ್ ನೊಂದಣಿಯಾಗಿದ್ದು, ಈ ಪೈಕಿ ಚಿಕ್ಕಮಗಳೂರು ರಾಗಿ ಖರೀದಿ ಕೇಂದ್ರದಲ್ಲಿ ೯೪೫ ರೈತರು ನೊಂದಾಯಿಸಿದ್ದು, ಸುಮಾರು ೧೫ ಸಾವಿರ ಕ್ವಿಂಟಾಲ್ ರಾಗಿ ಖರೀದಿಸಲಾಗುವುದು. ಕಳೆದ ಸಾಲಿನಲ್ಲಿ ೧೧೫೦ ರೈತರಿಂದ ೨೫೯೬೯ ಕ್ವಿಂಟಾಲ್ ರಾಗಿ ನೊಂದಣಿಯಾಗಿದ್ದು, ಈ ಪೈಕಿ ೭೪೧ ರೈತರಿಂದ ೧೫೭೧೫.೫೦ ಕ್ವಿಂಟಾಲ್ ರಾಗಿಯನ್ನು ಖರೀದಿಸಲಾಗಿದೆ ಎಂದು ವಿವರಿಸಿದರು.
ಪ್ರಸ್ತುತ ಸಾಲಿನಲ್ಲಿ ರೈತರು ನೊಂದಣಿ ಮತ್ತು ರಾಗಿ ಮಾರಾಟ ಮಾಡುವಾಗ ಕಡ್ಡಾಯವಾಗಿ ಎರಡು ಬಾರಿ ಬಯೋಮೆಟ್ರಿಕ್ ನೀಡಬೇಕೆಂದು ವಿನಂತಿಸಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಎಪಿಎಂಸಿ ಸಹಾಯಕ ನಿರ್ದೇಶಕ ವಿಶ್ವನಾಥ ರೆಡ್ಡಿ ಮಾಡನಾಡಿ, ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿಯೂ ರಾಗಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ಸರ್ಕಾರದ ಆದೇಶದಂತೆ ಬೆಂಬಲ ಬೆಲೆ ಯೋಜನೆಯಡಿ ಚಿಕ್ಕಮಗಳೂರು ಜಿಲ್ಲಾ ಕೇಂದ್ರದ ಎಪಿಎಂಸಿ ಆವರಣದಲ್ಲಿ ಇಂದು ರಾಗಿ ಖರೀದಿ ಕೇಂದ್ರ ಆರಂಭಿಸಲಾಗಿದೆ ಎಂದರು.
ಸಮರ್ಪಕ, ಪಾರದರ್ಶಕವಾಗಿ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸುವಂತೆ ಅಧಿಕಾರಿಗಳಿಗೆ ಕ್ರಮವಹಿಸುವಂತೆ ಸೂಚಿಸಿದ ಅವರು, ರೈತರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ರಾಗಿ ಖರೀದಿ ಕೇಂದ್ರದಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಎಪಿಎಂಸಿ ಕಾರ್ಯದರ್ಶಿ ಅಭಿನಂದನ್, ಆಹಾರ ಸಂಸ್ಕರಣೆ ಇಲಾಖೆಯ ಜನಾರ್ಧನ್ ಸಿ.ಹೆಚ್, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಲ ಶಾಖಾ ವ್ಯವಸ್ಥಾಪಕರಾದ ಚೇತನ್ ಎಂ.ಎಂ, ಉಪಸ್ಥಿತರಿದ್ದರು. ಮೊದಲಿಗೆ ಮೋಹನ್ ರಾವ್ ಸ್ವಾಗತಿಸಿದರು.
FAQ Quality Ragi Center Inauguration