ಚಿಕ್ಕಮಗಳೂರು: ಭಾರತ ದೇಶದಲ್ಲಿ ಸುದೀರ್ಘ ಆಡಳಿತ ನಡೆಸಿದ ಉಕ್ಕಿನ ಮಹಿಳೆ ಪ್ರಿಯದರ್ಶಿನಿ, ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಬಗ್ಗೆ ಹಗುರವಾಗಿ ಮಾತನಾಡಿರುವ ಬಿಜೆಪಿ ಮುಖಂಡರ ನಡೆಯನ್ನು ಖಂಡಿಸಿ ಇಂದು ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಸಮಿತಿ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.
ನಗರದ ಅಜಾದ್ ವೃತ್ತದಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು ಕೇಂದ್ರ ಸರ್ಕಾರ ಮತ್ತು ಬಿಜೆಪಿ ಮುಖಂಡರ ನಡೆಯನ್ನು ಖಂಡಿಸಿ ಘೋಷಣೆ ಕೂಗಿ ಹಿಟ್ಲರ್ ಎಂದು ಇಂದಿರಾ ಗಾಂಧಿಯವರನ್ನು ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ಅವಮಾನಿಸಿರುವುದನ್ನು ಖಂಡಿಸಿದರು.
ಈ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ ಮಂಜೇಗೌಡ, ದೇಶದ ಅಭಿವೃದ್ಧಿಗೆ ಇಂದಿರಾ ಗಾಂಧಿಯವರು ಪ್ರಧಾನಿಯಾಗಿದ್ದಾಗ ೨೦ ಅಂಶಗಳ ಕಾರ್ಯಕ್ರಮಗಳನ್ನು ಜಾರಿಗೆ ತಂದು ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿದ ಇವರ ಬಗ್ಗೆ ಬಿಜೆಪಿ ಮತ್ತು ಕೇಂದ್ರಸರ್ಕಾರ ಅವಹೇಳನ ಮಾಡಿದ್ದಾರೆಂದು ಆರೋಪಿಸಿದರು.
ಬ್ರಿಟೀಷ್ ಆಡಳಿತದಿಂದ ಖಾಲಿ ಖಜಾನೆಯಾಗಿದ್ದ ಭಾರತ ದೇಶದಲ್ಲಿ ಸರ್ವರಿಗೂ ಸಮಾನತೆ ತಂದುಕೊಟ್ಟ ಧೀಮಂತ ನಾಯಕಿಯಾಗಿದ್ದಾರೆ. ಇಂತಹವರ ಬಗ್ಗೆ ಕ್ಷುಲ್ಲಕ ರಾಜಕೀಯಕ್ಕಾಗಿ ಅವಹೇಳನ ಮಾಡಿರುವುದನ್ನು ಖಂಡಿಸಿದರು.
ಬಿಜೆಪಿ ಸೋಲಿನ ಭೀತಿಯಿಂದ ಹತಾಶೆಗೊಂಡು ಸಿ.ಟಿ. ರವಿ ಅವರು ಮನಬಂದಂತೆ ಮಾತನಾಡುತ್ತಿದ್ದಾರೆ, ಇಂದಿರಾ ಗಾಂಧಿ, ಸೋನಿಯಾ ಗಾಂಧಿ, ರಾಜೀವ್ ಗಾಂಧಿ, ಮಲ್ಲಿಕಾರ್ಜುನ್ ಖರ್ಗೆ, ರಾಹುಲ್ ಗಾಂಧಿ ಇವರುಗಳನ್ನು ಕೀಳಾಗಿ ಕಾಣುವ ಮೂಲಕ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದ್ದಾರೆಂದು ದೂರಿದರು.
ದೇಶಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಇಂದಿರಾ ಗಾಂಧಿ, ರಾಜೀವ್ ಗಾಂಧಿಯವರ ದೇಶಪ್ರೇಮವನ್ನು ಬಿಜೆಪಿ ಮುಖಂಡರಿಗೆ ಸಹಿಸಿಕೊಳ್ಳಲಾಗದೆ ಅವಹೇಳನಕಾರಿ ಹೇಳಿಕೆಯಲ್ಲಿ ತಲ್ಲೀನರಾಗಿದ್ದಾರೆಂದು ಟೀಕಿಸಿದ ಅವರು, ದೇಶಕ್ಕೆ ನಿಮ್ಮ ಕೊಡುಗೆ ಏನು ಎಂದು ಪ್ರಶ್ನಿಸಿದರು.
ಸಿ.ಟಿ. ರವಿ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಹಾಗೂ ನಾಯಕರ ಬಗ್ಗೆ ಅವಾಚ್ಯವಾಗಿ ಮಾತನಾಡಿ, ಅವರ ಬೂಟ್ ನೆಕ್ಕುವ ಪದ ಬಳಸಿದರೆ ರವಿಯವರ ಎಲ್ಲಾ ಕಾರ್ಯಕ್ರಮಗಳಿಗೆ ಕಪ್ಪು ಬಾವುಟ ಪ್ರದರ್ಶಿಸುವುದಾಗಿ ಎಚ್ಚರಿಸಿದರು.
ಕಾಂಗ್ರೆಸ್ ಪಕ್ಷ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರು ಹಾಕಿಕೊಟ್ಟಂತ ಸಂವಿಧಾನದ ಆಶಯದಂತೆ ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬಂತೆ ಕಾರ್ಯಾಂಗ, ನ್ಯಾಯಾಂಗ, ಶಾಸಕಾಂಗ ಮೂರು ಅಂಗಗಳಲ್ಲಿ ಕೆಲಸ ಮಾಡುತ್ತಿದೆ ಎಂದು ಹೇಳಿದರು.
ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸುತ್ತೇವೆ ಎಂಬ ಹೇಳಿಕೆಯಿಂದಾಗಿ ಚುನಾವಣೆ ಸಂದರ್ಭದಲ್ಲಿ ಜನರಿಂದ ತಿರಸ್ಕಾರಗೊಂಡಿರುವ ಸಿ.ಟಿ. ರವಿ ಸಂವಿಧಾನದ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ ಎಂದು ಲೇವಡಿ ಮಾಡಿದರು.
ಧಾರ್ಮಿಕ ಭಾವನೆಗಳನ್ನು ಕೆರಳಿಸಿ ಜಾತಿ-ಜಾತಿಗಳ ಮಧ್ಯೆ ವಿಶಬೀಜ ಬಿತ್ತಿ ಅಧಿಕಾರಕ್ಕಾಗಿ ಆಸೆಪಡುತ್ತಿರುವ ನೀವು ಸಂವಿಧಾನದ ಆಶಯಗಳನ್ನು ಗಾಳಿಗೆ ತೂರಿದ್ದೀರಿ ಎಂದು ಕುಟುಕಿದರು.
ಸಂವಿಧಾನ ಮತ್ತು ದೇಶದ ಜನರನ್ನು ರಕ್ಷಣೆ ಮಾಡುವುದು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ ಎಂಬುದನ್ನು ಮನಗಾಣಬೇಕು ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಲಾಕೇಶ್. ಆರ್, ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಹಿರೇಮಗಳೂರು ರಾಮಚಂದ್ರ, ಜಗದೀಶ್, ಮಲ್ಲೇಶ್ ಸ್ವಾಮಿ, ಗಂಗಾಧರ್, ಲಕ್ಯಾ ಸಿದ್ದೇಶ್, ಹಿರೇಗೌಜ ಶಿವು, ನವೀನ್ ಎತ್ತಿನಮನೆ, ಅಭಿಷೇಕ್, ಆದರ್ಶ್ ಬಹುಜನ್, ಮದನ್, ಪವನ್ ಮತ್ತಿತರರು ಉಪಸ್ಥಿತರಿದ್ದರು.
Youth Congress protests against BJP’s insults towards Congress leaders