ಚಿಕ್ಕಮಗಳೂರು: ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಪತ್ರಿಕಾ ರಂಗ ಸಮಾಜಕ್ಕೆ ಅಪಾರ ಕೊಡುಗೆ ನೀಡಿದೆ ಎಂದು ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಹೇಳಿದರು.
ಶನಿವಾರ ನಗರದ ಸ್ಕೌಟ್ ಭವನದಲ್ಲಿ ಪ್ರೆಸ್ಕ್ಲಬ್ ವತಿಯಿಂದ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗದ ಜತೆಗೆ ಪತ್ರಿಕಾ ರಂಗವೂ ಒಂದಾಗಿದ್ದು, ರಚನಾತ್ಮಕ ಟೀಕೆ, ಟಿಪ್ಪಣಿಗಳ ಮೂಲಕ ರಾಜಕೀಯ ರಂಗ, ಆಡಳಿತ ವರ್ಗವನ್ನು ಎಚ್ಚರಿಸಿ ಸರಿದಾರಿಗೆ ತರುವ ಕೆಲಸವನ್ನು ಪತ್ರಿಕಾ ರಂಗ ನಿರಂತರವಾಗಿ ಮಾಡಿಕೊಂಡು ಬರುತ್ತಿದೆ ಎಂದರು.
ಪತ್ರಿಕಾ ವಲಯದಿಂದ ರಚನಾತ್ಮಕ ಟೀಕೆ, ಟಿಪ್ಪಣಿಗಳು ಆ ಕ್ಷಣಕ್ಕೆ ನೋವುಂಟು ಮಾಡಿದರು. ಅವುಗಳನ್ನು ಸಕರಾತ್ಮಕ ವಾಗಿ ತಗೆದುಕೊಳ್ಳುವುದರಿಂದ ಸಮಾಜಕ್ಕೆ ಒಳ್ಳೇಯದಾಗುತ್ತದೆ. ಸಮಸ್ಯೆಗಳನ್ನು ಗುರುತಿಸಿ ಪರಿಹರಿಸಲು ಸಾಧ್ಯವಾಗು ತ್ತದೆ ಎಂದು ಅಭಿಪ್ರಾಯಿಸಿದ ಅವರು, ತಮ್ಮ ರಾಜಕೀಯ ಜೀವನದಲ್ಲಿ ಅನೇಕ ಪತ್ರಕರ್ತರು ತಮಗೆ ಮಾರ್ಗದರ್ಶನ ನೀಡಿದ್ದನ್ನು ಸ್ಮರಿಸಿಕೊಂಡ ಸಚಿವರು, ಅನೇಕ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ ಹಿರಿಯರು ತಮಗೆ ರಾಜಕೀಯವಾಗಿ ಮಾರ್ಗದರ್ಶನ ಮಾಡಿದ್ದಾರೆ.
ಯುವಶಕ್ತಿ ಈ ದೇಶದ ಸಂಪತ್ತು, ಯುವ ಶಕ್ತಿಯನ್ನು ಸಮರ್ಪಕವಾಗಿ ಬಳಸಿಕೊಂಡಲ್ಲಿ ದೇಶ ಅಭಿವೃದ್ಧಿ ಸಾಧಿಸಲು ಸಾಧ್ಯವಾಗುತ್ತಿದೆ. ಇಂದು ಸಾಕಷ್ಟು ವಿದ್ಯಾವಂತರು ಉದ್ಯೋಗ ದೊರೆಯದೆ ಸಮಸ್ಯೆ ಎದುರಿಸುತ್ತಿದ್ದಾರೆ. ವಿದ್ಯಾವಂತರಿಗೆ ಉದ್ಯೋಗ ಸೃಷ್ಠಿಸುವುದು ಕೇಂದ್ರ ಮತ್ತು ರಾಜ್ಯ ಸರ್ಕಾರದ ಜವಬ್ದಾರಿಯಾಗಿದೆ. ರಾಜ್ಯ ಸರ್ಕಾರ ಉದ್ಯೋಗ ಸೃಷ್ಠಿಗೆ ಶ್ರಮಿಸುತ್ತಿದೆ ಎಂದು ಹೇಳಿದರು.
ರಾಜ್ಯದಲ್ಲಿ ವಿದ್ಯುತ್ಗೆ ಬಾರೀ ಬೇಡಿಕೆ ಇದ್ದು, ಈ ನಿಟ್ಟಿನಲ್ಲಿ ಇಂಧನ ಇಲಾಖೆ ಕುಸುಮ ಯೋಜನೆ ಸೇರಿದಂತೆ ಇತರೆ ಯೋಜನೆಯಡಿಯಲ್ಲಿ ೧೧೦ ಕೋಟಿ ರೂ. ವೆಚ್ಚದಲ್ಲಿ ೨೫೦೦ ಮೆಗಾ ವ್ಯಾಟ್ ಉತ್ಪಾದನೆಗೆ ಚಾಲನೆ ನೀಡಲಾಗಿದೆ. ಇದರಿಂದ ರಾಜ್ಯದ ರೈತರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.
ಶಾಸಕ ಎಚ್.ಡಿ.ತಮ್ಮಯ್ಯ ಮಾತನಾಡಿ, ಪತ್ರಿಕಾರಂಗ ಸಮಾಜದ ಧ್ವನಿಯಾಗಿ ಕೆಲಸ ಮಾಡುತ್ತಿದೆ. ಸ್ವಾತಂತ್ರ್ಯ ಹೋರಾಟ ದಲ್ಲಿ ಅನೇಕ ಪತ್ರಿಕೆಗಳು ಶಕ್ತಿಮೀರಿ ಶ್ರಮಿಸಿವೆ. ಬ್ರಿಟಿಷರಿಗೆ ಭಯಪಡದೆ ನಿರ್ಭೀತಿಯಾಗಿ ಜನತೆಗೆ ವಿಷಯಗಳನ್ನು ಮುಟ್ಟಿಸುವ ಕೆಲಸವನ್ನು ಪತ್ರಿಕೆಗಳು ಮಾಡಿವೆ ಎಂದ ಅವರು, ಸಮಾಜದ ಅಂಕುಡೊಂಕುಗಳನ್ನು ತಿದ್ದಿತೀಡುವ ಕೆಲಸವನ್ನು ಪತ್ರಿಕೆಗಳು ಮಾಡುತ್ತಿವೆ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮಾತನಾಡಿ, ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಪತ್ರಿಕಾ ರಂಗ ನಿರ್ಭೀತಿ ಯಿಂದ ಕೆಲಸ ಮಾಡಬೇಕು ಒಂದು ವೇಳೆ ಭೀತಿಯಿಂದ ಕೆಲಸ ಮಾಡಿದರೇ ಪ್ರಜಾಪ್ರಭುತ್ವವೇ ಅಪಾಯಕ್ಕೆ ತಲುಪುತ್ತದೆ. ಆಧುನಿಕ ತಂತ್ರಜ್ಞಾನ, ಸಾಮಾಜಿಕ ಜಾಲತಾಣದಿಂದ ದೂರ ಇದ್ದವರನ್ನು ಹತ್ತಿರ ಮಾಡುತ್ತಿದೆ, ಹತ್ತಿರ ಇದ್ದವರನ್ನು ದೂರ ಮಾಡುತ್ತಿದೆ. ಆಧುನಿಕ ತಂತ್ರಜ್ಞಾನದ ಪ್ರಭಾವ ಪತ್ರಿಕಾ ರಂಗದ ಮೇಲೂ ಬಿದ್ದಿದೆ. ಎಲ್ಲಾ ಸವಾಲುಗಳ ನಡುವೆ ನಿರ್ಭೀತೀಯ, ವಸ್ತುನಿಷ್ಠ, ಸತ್ಯದ ಸುದ್ದಿಗೆ ಆದ್ಯತೆ ಸಿಗಬೇಕು. ಆ ನಿಟ್ಟಿನಲ್ಲಿ ಚಿಂತನೆ ನಡೆಯಬೇಕು ಎಂದರು.
ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಮಾತನಾಡಿ, ಇಂದು ಪತ್ರಿಕೆ ಓದುವವರ ಸಂಖ್ಯೆ ಕಡಿಮೆಯಾ ಗಿದೆ. ಪ್ರತಿಯೊಬ್ಬರು ಪತ್ರಿಕೆ ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು ಎಂದ ಅವರು, ಪತ್ರಿಕೆಗಳು ಸಮಾಜದ ಕಣ್ಣು ತೆರೆಸುವ ಕೆಲಸ ಮಾಡುತ್ತಿದ್ದು, ವಸ್ತುನಿಷ್ಟ ವರದಿ ಮೂಲಕ ಸರ್ಕಾರ, ಜನಪ್ರತಿನಿಧಿಗಳು, ಅಧಿಕಾರಿಗಳನ್ನು ಎಚ್ಚರಿಸುವ ಕೆಲಸವನ್ನು ಪತ್ರಿಕೆಗಳು ಮಾಡುತ್ತಿವೆ ಎಂದರ.
ಜಿಲ್ಲಾಧಿಕಾರಿ ಸಿ.ಎನ್.ಮೀನಾನಾಗರಾಜ್ ಮಾತನಾಡಿ, ಜಿಲ್ಲೆಯಲ್ಲಿನ ಕುಗ್ರಾಮಗಳು ಇಂದಿಗೂ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಸಮಸ್ಯೆಗಳನ್ನು ಜಿಲ್ಲಾಡಳಿತದ ಗಮನಕ್ಕೆ ತರುವ ಕೆಲಸವನ್ನು ಪತ್ರಿಕೆಗಳು ಮಾಡುತ್ತಿದ್ದು, ಸಮಸ್ಯೆ ನಿವಾರಣೆಗೆ ಸಹಕಾರಿಯಾಗಿವೆ. ಸರ್ಕಾರದ ಯೋಜನೆಗಳನ್ನು ಸಾರ್ವಜನಿಕರಿಗೆ ಮುಟ್ಟಿಸುವ ಮೂಲಕ ನೆರವಾಗುತ್ತಿವೆ ಎಂದರು.
ಪ್ರೆಸ್ಕ್ಲಬ್ ಅಧ್ಯಕ್ಷ ಪಿ.ರಾಜೇಶ್ ಮಾತನಾಡಿ, ಪತ್ರಕರ್ತರು ಪತ್ರಿಕಾ ಮೌಲ್ಯ, ಸಿದ್ಧಾಂತಗಳ ನಡುವೆ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದರು. ಪ್ರೆಸ್ಕ್ಲಬ್ ಪ್ರಧಾನ ಕಾರ್ಯದರ್ಶಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಜಿ.ಪಂ. ಮುಖ್ಯಕಾರ್ಯನಿರ್ವಹಣಾಧಿಕಾರಿ ಎಚ್.ಎಸ್. ಕೀರ್ತನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ|ವಿಕ್ರಮ್ ಅಮಟೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿ ಮಂಜೇಗೌಡ ವಿವಿಧ ಸಂಘಸಂಸ್ಥೆಗಳ ಮುಖಂಡರು ಮತ್ತು ಪದಾಧಿಕಾರಿಗಳು ಇದ್ದರು. ಪ್ರೆಸ್ಕ್ಲಬ್ ಅಧ್ಯಕ್ಷ ಪಿ.ರಾಜೇಶ್ ಅಧ್ಯಕ್ಷತೆವಹಿಸಿದ್ದರು. ಪ್ರೆಸ್ಕ್ಲಬ್ ಉಪಾಧ್ಯಕ್ಷ ಸಿ.ಡಿ.ಚಂದ್ರೇಗೌಡ ಸ್ವಾಗತಿಸಿದರು. ಎ.ಎನ್.ಮೂರ್ತಿ ಪ್ರಾರ್ಥಿಸಿದರು. ಎನ್.ಕೆ.ಗೋಪಿ ನಿರೂಪಿಸಿದರು.
The fourth arm of democracy is the great contribution of the press to the society