ಚಿಕ್ಕಮಗಳೂರು: ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ಬಡವರ್ಗದ ಮಕ್ಕಳಿಗೆ ಸರ್ಕಾರ ಮೂಲ ಸೌಕರ್ಯಗಳನ್ನು ಒದಗಿಸಿ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಿದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು.
ಅವರು ಇಂದು ತಾಲ್ಲೂಕಿನ ಅಲ್ಲಂಪುರ ಕುವೆಂಪು ಶತಮಾನೋತ್ಸವ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಜಿ.ಪಂ, ತಾ.ಪಂ, ಶಾಲಾ ಶಿಕ್ಷಣ ಇಲಾಖೆ, ಶಿಕ್ಷಕರ ಸೇವಾ ಬಳಗ ಇವರುಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ನಲಿಕಲಿ ಟೇಬಲ್ ಮತ್ತು ಚೇರ್ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಆರೋಗ್ಯ, ಶಿಕ್ಷಣ, ಬದುಕಿಗೆ ಆದ್ಯತೆ ನೀಡಿ ಅನುದಾನ ನೀಡುವುದು ಸರ್ಕಾರ ಮತ್ತು ಜನಪ್ರತಿನಿಧಿಗಳ ಕರ್ತವ್ಯವಾಗಿದ್ದು, ಈ ನಿಟ್ಟಿನಲ್ಲಿ ಸಾರ್ವಜನಿಕ ಸಹಭಾಗಿತ್ವ ಅಗತ್ಯ ಎಂದರು.
ಹುಟ್ಟಿದ ಮೇಲೆ ಒಂದಲ್ಲಾ ಒಂದು ಕ್ಷೇತ್ರದಲ್ಲಿ ಸಾಧನೆ ಮಾಡದಿದ್ದರೆ ಸಾರ್ಥಕತೆ ಆಗುವುದಿಲ್ಲ, ಇಲ್ಲಿ ಸೇರಿರುವ ಪ್ರಾಥಮಿಕ ಶಾಲಾ ಶಿಕ್ಷಕರನ್ನು ವಿದ್ಯಾರ್ಥಿಗಳು ತಮ್ಮ ಬದುಕಿನುದ್ದಕ್ಕೂ ನೆನಪಿನಲ್ಲಿಟ್ಟುಕೊಂಡಿರುತ್ತಾರೆ ಎಂದು ಹೇಳಿದರು.
ಸರ್ಕಾರಿ ಶಾಲೆಗಳ ಸಬಲೀಕರಣಕ್ಕಾಗಿ ತಾಲ್ಲೂಕಿನ ೭೦ ಸರ್ಕಾರಿ ಪ್ರಾಥಮಿಕ ಹಿರಿಯ ಮತ್ತು ಕಿರಿಯ ಶಾಲೆಗಳಿಗೆ ೧೨ ಲಕ್ಷ ರೂ ವೆಚ್ಚದಲ್ಲಿ ಬೆಂಗಳೂರಿನ ಸಿನೊಪ್ಸಿಸ್ ಮತ್ತು ಇಂಡಿಯಾ ಸುಧಾರ್ ಎಜುಕೇಷನ್ ಅಂಡ್ ಚಾರಿಟೇಬಲ್ ಟ್ರಸ್ಟ್ ಇವರು ನಲಿಕಲಿ ಟೇಬಲ್ ಮತ್ತು ಚೇರ್ಗಳನ್ನು ಕೊಡುಗೆಯಾಗಿ ನೀಡಿದ್ದಾರೆ ಎಂದು ಶ್ಲಾಘಿಸಿದರು.
ಎಲ್ಲವನ್ನೂ ಸರ್ಕಾರದಿಂದಲೇ ಮಾಡಲು ಅಸಾಧ್ಯ, ಆದ್ದರಿಂದ ಪ್ರತೀ ವರ್ಷ ನಗರದಲ್ಲೊಂದು, ಗ್ರಾಮೀಣ ಭಾಗದಲ್ಲೊಂದು ಸರ್ಕಾರಿ ಶಾಲೆಗಳನ್ನು ಆಯ್ಕೆಮಾಡಿಕೊಂಡು ಮೂಲಭೂತ ಸೌಕರ್ಯ ಕಲ್ಪಿಸುವಂತೆ ಮನವಿ ಮಾಡಲು ಬೆಂಗಳೂರಿನಲ್ಲಿ ಉದ್ದಿಮೆದಾರರನ್ನು ಸಂಪರ್ಕಿಸುವುದಾಗಿ ಭರವಸೆ ನೀಡಿದರು.
ಮಾತನಾಡಲು ಮಾತೃಭಾಷೆ ಕನ್ನಡ, ಬದುಕಲು ಆಂಗ್ಲಭಾಷೆ ಎಂಬ ಘೋಷವಾಕ್ಯದೊಂದಿಗೆ ರಾಜ್ಯಸರ್ಕಾರ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ತಾಲ್ಲೂಕಿನಲ್ಲಿ ೧೭ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ಹಾಗೂ ಆಂಗ್ಲ ಮಾಧ್ಯಮ ತರಗತಿಗಳನ್ನು ಆರಂಭ ಮಾಡಲು ಚಿಂತನೆ ನಡೆಸುತ್ತಿದೆ ಎಂದು ಹೇಳಿದರು.
ಪ್ರತಿದಿನ ಶಾಲೆಗಳಲ್ಲಿ ಡಾ. ಬಿ.ಆರ್. ಅಂಬೇಡ್ಕರ್ರವರು ನೀಡಿರುವ ಸಂವಿಧಾನದ ಪೀಠಿಕೆಯನ್ನು ಓದಿಸಬೇಕು, ವಿಶ್ವಗುರು ಬಸವಣ್ಣನವರ ಒಂದು ವಚನವನ್ನು ಹೇಳಿಕೊಡುವ ಮೂಲಕ ಅದರ ಅರ್ಥವನ್ನು ಶಿಕ್ಷಕರು ವಿದ್ಯಾರ್ಥಿಗಳಿಗೆ ತಿಳಿಸಬೇಕು ಎಂದು ಸಲಹೆ ನೀಡಿದರು.
ಸಿವಿಲ್ ನ್ಯಾಯಾಧೀಶರಾದ ಹನುಮಂತಪ್ಪ ಮಾತನಾಡಿ, ಎದೆಗೆ ಬಿದ್ದ ಅಕ್ಷರ, ಭೂಮಿಗೆ ಬಿದ್ದ ಬೀಜ ಎಂದಾದರೂ ಒಂದು ದಿನ ಫಲ ಕೊಡುತ್ತದೆ ಎಂಬುದನ್ನು ಅರ್ಥಪೂರ್ಣಗೊಳಿಸುವ ಬಹುದೊಡ್ಡ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದ ಅವರು, ಅಂಬೇಡ್ಕರ್, ಬಸವ ಮಾರ್ಗದ ಕ್ರಾಂತಿಗೀತೆಯನ್ನು ಹಾಡಿ ರಂಜಿಸಿದರು.
ಭ್ರಾತೃತ್ವ ಭಾವನೆ ಬೆಳೆಯದಿದ್ದರೆ ಸಮಾಜದಲ್ಲಿ ಸಮಾನತೆ ಬೆಳೆಯುವುದಿಲ್ಲ, ಈ ನಿಟ್ಟಿನಲ್ಲಿ ಪ್ರಾಥಮಿಕ ಹಂತದಲ್ಲೇ ಮಕ್ಕಳಲ್ಲಿ ಇದನ್ನು ಬಿತ್ತಬೇಕು. ಅಕ್ಷರದಿಂದ ವಂಚಿತರಾಗಿದ್ದ ಸಮುದಾಯದಲ್ಲಿ ಜನಿಸಿದ ಡಾ. ಬಿ.ಆರ್. ಅಂಬೇಡ್ಕರ್ ಅವರು ಇಂದು ವಿಶ್ವದ ಅಗ್ರಗಣ್ಯ ನಾಯಕರಾಗಿದ್ದಾರೆಂದು ಶ್ಲಾಘಿಸಿದರು.
ಖಾಸಗಿ ಶಿಕ್ಷಣ ಸಂಸ್ಥೆಗಳು ಇಂದು ಸರ್ಕಾರಿ ಶಾಲೆಯನ್ನು ಧಮನ ಮಾಡುವ ಮಟ್ಟಕ್ಕೆ ಬೆಳೆದುನಿಂತಿದೆ. ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿದ ಏಕಲವ್ಯನ ಹೆಬ್ಬೆರಳು ಕತ್ತರಿಸಿದಂತೆ ಆಗಬಾರದು. ಶಿಕ್ಷಣ ಎಲ್ಲರ ಸ್ವತ್ತಾಗಬೇಕೆಂದು ಹೇಳಿದರು.
ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಕಡಿಮೆಯಾಗದಂತೆ ನೋಡಿಕೊಳ್ಳುವುದು ಶಿಕ್ಷಕರ ಜವಾಬ್ದಾರಿ ಮತ್ತು ಕರ್ತವ್ಯವಾಗಿದೆ. ಇದನ್ನು ರೂಢಿಸಿಕೊಂಡಾಗ ಮಾತ್ರ ಶೇ.೧೦೦ ರಷ್ಟು ಸಾಧನೆ ಮಾಡಲು ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದರು.
ಶಿಕ್ಷಕಿ ಗೀತಾ ಕೆ.ಹೆಚ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ರುದ್ರಪ್ಪ ಗ್ರಾಪಂ ಸದಸ್ಯ ರಮೇಶ್, ಜಯರಾಜ್ ಅರಸ್, ಶಂಕರ್, ಸುಂದರೇಶ್, ಉಪಸ್ಥಿತರಿದ್ದರು. ಮೊದಲಿಗೆ ಮುಖ್ಯ ಶಿಕ್ಷಕ ಜೋಗಪ್ಪ ಸ್ವಾಗತಿಸಿದರು.
The government has prioritized life and provided infrastructure.