ಚಿಕ್ಕಮಗಳೂರು: ನಗರದ ಸೌಂದರ್ಯ ಹೆಚ್ಚಿಸುವ ಜೊತೆಗೆ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ ನೀಡಿ ಮೇ ಮಾಹೆಯ ಅಂತ್ಯದೊಳಗೆ ನಗರದ ಎಲ್ಲಾ ರಸ್ತೆಗಳನ್ನು ಸಂಪೂರ್ಣ ಡಾಂಬರೀಕರಣ ಮಾಡಿ ಮುಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಶಾಸಕ ಹೆಚ್.ಡಿ ತಮ್ಮಯ್ಯ ತಿಳಿಸಿದರು.
ಅವರು ಇಂದು ನಗರದ ಬಸವೇಶ್ವರ ರಸ್ತೆ ಬಸವತತ್ವ ಪೀಠದ ಮುಂಭಾಗದಲ್ಲಿ ಹಾಗೂ ಕಣಿವೆ ರುದ್ರೇಶ್ವರ ದೇವಸ್ಥಾನದ ಸಮೀಪ ತಲಾ ೧೨ ಲಕ್ಷ ರೂ ವೆಚ್ಚದಲ್ಲಿ ಶಾಸಕರ ನಿಧಿಯಿಂದ ನಿರ್ಮಿಸಲಾಗಿರುವ ಸುಸಜ್ಜಿತ ಅತ್ಯಾಧುನಿಕ ಬಸ್ ತಂಗುದಾಣಗಳನ್ನು ಸಾರ್ವಜನಿಕ ಸಮರ್ಪಣೆಗೊಳಿಸಿ ಮಾತನಾಡಿದರು.
ನಗರಸಭೆ ಮತ್ತು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಗರದ ಎಲ್ಲಾ ರಸ್ತೆಗಳನ್ನು ಸುಮಾರು ೨೦.೫೦ ಕೋಟಿ ರೂ ವೆಚ್ಚದಲ್ಲಿ ಡಿಸೆಂಬರ್ನಿಂದ ನಗರದ ಎಲ್ಲಾ ರಸ್ತೆಗಳ ಡಾಂಬರೀಕರಣ ಕಾಮಗಾರಿ ಪ್ರಾರಂಭವಾಗಲಿದೆ ಎಂದು ಹೇಳಿದರು.
ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ನವೀನವಾದ ಅತ್ಯಾಧುನಿಕ ಮಾದರಿಯಲ್ಲಿ ಬಸ್ ತಂಗುದಾಣಗಳನ್ನು ನಿರ್ಮಾಣ ಮಾಡಬೇಕೆಂಬ ಕನಸು ಕಂಡಿದ್ದು, ಅದರಂತೆ ಕೈಗಾರಿಕೆ ಮತ್ತು ವಾಣಿಜ್ಯೋದ್ಯಮದಲ್ಲಿ ಲೈಫ್ಲೈನ್ ಫಿಡ್ಸ್ ಮಾದರಿಯಾಗಿದೆ ಎಂದರು.
ಜನರ ಬೇಡಿಕೆಗನುಗುಣವಾಗಿ ಹತ್ತರಲ್ಲಿ ಮೂರನ್ನಾದರೂ ಶಾಶ್ವತವಾಗಿ ಜನಮಾನಸದಲ್ಲಿ ಉಳಿಯುವಂತೆ ಕಾಮಗಾರಿಗಳನ್ನು ಕೈಗೊಂಡು ಅಭಿಲಾಷೆ ಮತ್ತು ಸದುದ್ದೇಶ ಹೊಂದಿರುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.
ಕಣಿವೆ ರುದ್ರೇಶ್ವರ ದೇವಸ್ಥಾನದ ಸಮೀಪ, ಕಲ್ಯಾಣ ನಗರದಲ್ಲಿ, ಹೌಸಿಂಗ್ ಬೋರ್ಡ್ನಲ್ಲಿ ಮತ್ತು ದೊಡ್ಡ ಕುರುಬರಹಳ್ಳಿಯಲ್ಲಿ ಈಗಾಗಲೇ ಈ ನಾಲ್ಕು ಬಸ್ ತಂಗುದಾಣಗಳನ್ನು ನಿರ್ಮಾಣ ಮಾಡಲಾಗಿದೆ ಎಂದ ಅವರು, ನೂತನ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ದಂಟರಮಕ್ಕಿ ಬಡಾವಣೆಯಲ್ಲಿ ಮತ್ತು ಪಾಲಿಟೆಕ್ನಿಕ್ ಬಳಿ ನೂತನ ಅತ್ಯಾಧುನಿಕ ಬಸ್ ತಂಗುದಾಣ ನಿರ್ಮಾಣ ಮಾಡಲು ಗುದ್ದಲಿ ಪೂಜೆ ನೆರವೇರಿಸಲಾಗಿದೆ ಎಂದರು.
ವಿದೇಶ ಪ್ರವಾಸ ಸಂದರ್ಭದಲ್ಲಿ ಜರ್ಮನಿಯಲ್ಲಿ ಈ ರೀತಿಯ ಅತ್ಯಾಧುನಿಕ ಬಸ್ ತಂಗುದಾಣಗಳನ್ನು ನಿರ್ಮಿಸಿರುವುದನ್ನು ಗಮನಿಸಿ ಇದೇ ಮಾದರಿಯಲ್ಲಿ ಕ್ಷೇತ್ರದಲ್ಲಿಯೂ ಅಳವಡಿಸಿಕೊಳ್ಳಬೇಕೆಂದು ನಿರ್ಧರಿಸಿದ ಹಿನ್ನೆಲೆಯಲ್ಲಿ ಸಾರ್ವಜನಿಕರ ಅನುಕೂಲಕ್ಕೆ ತಕ್ಕಂತೆ ಬಸ್ ತಂಗುದಾಣ ನಿರ್ಮಿಸಲಾಗಿದೆ ಎಂದು ಹೇಳಿದರು.
ಕ್ಷೇತ್ರದಲ್ಲಿ ಮುಂದೆಯೂ ಪಕ್ಷಾತೀತವಾಗಿ ಜಾತ್ಯಾತೀತವಾಗಿ ನಡೆದುಕೊಳ್ಳಬೇಕೆಂದು ತೀರ್ಮಾನಿಸಿದ್ದು, ಜನರ ಅವಶ್ಯಕತೆಗೆ ತಕ್ಕಂತೆ ಸೌಲಭ್ಯ ಕಲ್ಪಿಸಲು ಮುಂದಾಗಿರುವುದಾಗಿ ಭರವಸೆ ನೀಡಿದರು.
ಸುಮಾರು ೨೦ ಕೋಟಿ ರೂ ವೆಚ್ಚದಲ್ಲಿ ಮುಂದಿನ ತಿಂಗಳು ಕೆಎಸ್ಆರ್ಟಿಸಿ ಸುಸಜ್ಜಿತ ಅತ್ಯಾಧುನಿಕ ಬಸ್ ನಿಲ್ದಾಣವನ್ನು ನಗರದಲ್ಲಿ ನಿರ್ಮಾಣ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಇವರುಗಳನ್ನು ಆಹ್ವಾನಿಸಿ ಶಂಕುಸ್ಥಾಪನೆ ನೆರವೇರಿಸುವುದಾಗಿ ಹೇಳಿದರು.
ಈ ಬಾರಿ ಅತೀ ಹೆಚ್ಚು ಮಳೆ ಬಿದ್ದ ಪರಿಣಾಮ ನಗರದಲ್ಲಿ ರಸ್ತೆಗಳು ಗುಂಡಿಗಳಿಂದ ಕೂಡಿದ್ದು, ಯುಜಿಡಿ ಮತ್ತು ಅಮೃತ್ ಯೋಜನೆಯಿಂದ ಹಾನಿಯಾಗಿರುವ ರಸ್ತೆಗಳನ್ನು ಡಿಸೆಂಬರ್ನಿಂದ ಡಾಂಬರೀಕರಣ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದರು.
ನಗರಸಭಾಧ್ಯಕ್ಷೆ ಶೀಲಾದಿನೇಶ್ ಮಾತನಾಡಿ, ಪ್ರಯಾಣಿಕರ ಅವಶ್ಯಕತೆಗೆ ತಕ್ಕಂತೆ ಬಸ್ ತಂಗುದಾಣ ನಿರ್ಮಾಣ ಮಾಡಿ ಇಂದು ಸಾರ್ವಜನಿಕರಿಗೆ ಲೋಕಾರ್ಪಣೆ ಮಾಡುತ್ತಿರುವ ಶಾಸಕ ಹೆಚ್.ಡಿ. ತಮ್ಮಯ್ಯ ಅವರಿಗೆ ಅಭಿನಂದಿಸುವುದಾಗಿ ಹೇಳಿದರು.
ನಗರಸಭೆ ಸದಸ್ಯ ಅರುಣ್ ಕುಮಾರ್ಮಾತನಾಡಿ, ಕಲ್ಯಾಣ ನಗರದ ಟ್ರಸ್ಟ್ ಜೊತೆ ಸೇರಿ ವಾರ್ಡ್ನ್ನು ಸ್ವಚ್ಚತೆಗೊಳಿಸುತ್ತಿದ್ದೇವೆ ಜೊತೆಗೆ ಇದನ್ನು ಮಾದರಿ ವಾರ್ಡ್ ಆಗಿಸಲು ಗುರಿ ಹೊಂದಲಾಗಿದ್ದು, ಶಾಸಕರು ನಗರಸಭೆಯೊಂದಿಗೆ ಕೈಜೋಡಿಸುತ್ತಾರೆಂದು ವಿಶ್ವಾಸ ವ್ಯಕ್ತಪಡಿಸಿದರು.
ನಗರದ ಎಲ್ಲಾ ವಾರ್ಡ್ಗಳಲ್ಲಿಯೂ ರಸ್ತೆಗಳ ಡಾಂಬರೀಕರಣ, ಬೀದಿನಾಯಿಗಳ ಉಪಟಳ ಸಮಸ್ಯೆ ಇದ್ದು, ಇದಕ್ಕೆ ಅಗತ್ಯ ಕ್ರಮ ಕೈಗೊಂಡು ಶಾಶ್ವತ ಪರಿಹಾರ ಕಂಡುಕೊಳ್ಳಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಸಿಡಿಎ ಅಧ್ಯಕ್ಷ ನಯಾಜ್ ಅಹಮದ್, ನಗರಸಭೆ ಉಪಾಧ್ಯಕ್ಷೆ ಲಲಿತಾನಾಯ್ಕ, ಲೈಫ್ಲೈನ್ ಫೀಡ್ಸ್ ಮಾಲೀಕರಾದ ಕಿಶೋರ್ಕುಮಾರ್ ಹೆಗ್ಡೆ, ಸದಸ್ಯರಾದ ಗುರುಮಲ್ಲಪ್ಪ, ಎ.ಸಿ. ಕುಮಾರ್, ನಾಮಿನಿ ಸದಸ್ಯ ಕೀರ್ತಿಶೇಠ್, ಆಯುಕ್ತರಾದ ಬಸವರಾಜ್ ಸಿಡಿಎ ಆಯುಕ್ತರಾದ ನಾಗರತ್ನ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ ಮಂಜೇಗೌಡ, ಪ್ರವೀಣ್, ಗಂಗಾಧರ್ ಮತ್ತಿತರರು ಉಪಸ್ಥಿತರಿದ್ದರು.
Priority given to all-round development of the city